ಬಂಗಾಳ ಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ ಹೆಚ್ಚಾದ ಹಿನ್ನೆಲೆ ರಾಜ್ಯದಲ್ಲಿ ಇನ್ನೂ 5 ದಿನ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ದಕ್ಷಿಣ ಒಳನಾಡಿ, ಉತ್ತರ ಒಳನಾಡು, ಕರಾವಳಿ ಹಾಗೂ ಬೆಂಗಳೂರಿಗೆ ಅಲರ್ಟ್ ಘೋಷಣೆ ಮಾಡಿದೆ. ದಕ್ಷಿಣ ಒಳನಾಡಿನಲ್ಲಿ ಇಂದಿನಿಂದ 5 ದಿನ ಮಳೆಯಾಗಲಿದ್ದು ಹವಾಮಾನ ಇಲಾಖೆ ಯಲ್ಲೋ ಅಲರ್ಟ್ ಘೋಷಣೆ ಮಾಡಿದೆ.
ಮುಂದಿನ 48 ಘಂಟೆಗಳು ಕರಾವಳಿಯ ಎಲ್ಲಾ ಜಿಲ್ಲೆಗಳಲ್ಲಿ ಮತ್ತು ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಧಾರವಾಡ, ಕೊಪ್ಪಳ, ರಾಯಚೂರು, ಗದಗ, ಕಲಬುರ್ಗಿ ಜಿಲ್ಲೆಗಳ ಮತ್ತು ದಕ್ಷಿಣ ಒಳನಾಡಿನ ಬಳ್ಳಾರಿ, ಹಾಸನ, ಕೊಡಗು, ಮಂಡ್ಯ, ಚಾಮರಾಜನಗರ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಇನ್ನು, ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿದ್ದು, ಕೆಲವು ಬಾರಿ ಮಳೆ/ಗುಡುಗಿನಿಂದ ಕೂಡಿದ ಮಳೆಯಾಗಲಿದ್ದು, ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 28 ಮತ್ತು 19 ಡಿಗ್ರಿ ಸೆಲ್ಸಿಯಸ್ ಆಗಿರುವ ಸಾಧ್ಯತೆಯಿದೆ.