ದಾವಣಗೆರೆ: ಸ್ವಾತಂತ್ರ್ಯ ಅಮೃತಮಹೋತ್ಸವದ ಅಂಗವಾಗಿ ಇಂದಿನಿಂದ ಆಗಸ್ಟ್ 15 ರವರೆಗೆ ‘ಹರ್ ಘರ್ ತಿರಂಗಾ’ ಎಂಬ ಘೋಷವಾಕ್ಯದೊಂದಿಗೆ ರಾಷ್ಟ್ರದಾದ್ಯಂತ ಪ್ರತಿ ಮನೆಯಲ್ಲೂ ರಾಷ್ಟ್ರ ಧ್ವಜವನ್ನು ಹಾರಿಸಿ ದೇಶಭಕ್ತಿ ದೇಶಾಭಿಮಾನ ಬಿಂಬಿಸುವ ಮೂಲಕ ನಮ್ಮ ರಾಷ್ಟ್ರ ಪ್ರೇಮವನ್ನು ಅಭಿವ್ಯಕ್ತಿಗೊಳಿಸಲು ‘ಹರ್ ಘರ್ ತಿರಂಗಾ’ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಶಿವಾನಂದ ಕಾಪಶಿ ಅವರು ತಿಳಿಸಿದ್ದಾರೆ.
ಇದರಿಂದ ಈ ಮೂರು ದಿನ ಎಲ್ಲಾ ಮನೆಗಳಲ್ಲಿ ಹಾಗೂ ಸರ್ಕಾರೇತರ ಸಂಘ-ಸಂಸ್ಥೆಗಳ ಮೇಲೆ ನಿರಂತರವಾಗಿ ರಾಷ್ಟ್ರ ಧ್ವಜವನ್ನು ಹಾರಿಸುವುದು ಮತ್ತು ಸರ್ಕಾರಿ ಕಚೇರಿ ಕಟ್ಟಡಗಳ ಮೇಲೆ ಇಂದಿನಿಂದ ಆಗಸ್ಟ್ 15 ರವರೆಗೆ(ಸೂರ್ಯೋದಯ ಮತ್ತು ಸೂರ್ಯಸ್ತದ ಒಳಗೆ) ರಾಷ್ಟ್ರಧ್ವಜವನ್ನು ಹಾರಿಸುವುದು, ಈ ಮೂರು ದಿನಗಳ ನಂತರ ಗೌರವಪೂರ್ವಕವಾಗಿ ರಾಷ್ಟ್ರಧ್ವಜವನ್ನು ಇಳಿಸುವುದು ಮತ್ತು ಸಂರಕ್ಷಿಸುವುದು ನಮ್ಮೆಲ್ಲರ ಹೊಣೆಯಾಗಿರುತ್ತದೆ.
ಇನ್ನು, ನಗರದ ವಾರ್ಡು ವ್ಯಾಪ್ತಿಯಲ್ಲಿ ಮೂರು ದಿನಗಳ ಕಾಲ ಸಂಪೂರ್ಣ ವಿಚಕ್ಷಣೆ ಮಾಡಲು ಅಧಿಕಾರಿಗಳನ್ನು ನೇಮಿಸಲಾಗಿದ್ದು, ಈ ಮೂರು ದಿನಗಳು ಮನೆ ಮನೆಯಲ್ಲೂ ರಾಷ್ಟ್ರಧ್ವಜ ಅಭಿಯಾನದಲ್ಲಿ ಧ್ವಜ ಸಂಹಿತೆಯನ್ನು ಉಲ್ಲಂಘಿಸದಂತೆ ಸಾರ್ವಜನಿಕರೆಲ್ಲರೂ ಈ ಅಭಿಯಾನದಲ್ಲಿ ಭಾಗವಹಿಸುವುದು ಹಾಗೂ 03 ದಿನಗಳ ನಂತರ ಧ್ವಜವನ್ನು ಸಂರಕ್ಷಿಸಿಡುವುದು ಸಹ ಅತ್ಯಂತ ಮಹತ್ವದ್ದಾಗಿದೆ. ಆದ್ದರಿಂದ ಎಲ್ಲಾ ಸಾರ್ವಜನಿಕರು ಈ ನಿಟ್ಟಿನಲ್ಲಿ ಧ್ವಜ ಸಂಹಿತೆಯನ್ನು ಕಟ್ಟುನಿಟ್ಟಾಗಿ ಪಾಲಿಸಿ ರಾಷ್ಟ್ರಧ್ವಜದ ಘನತೆ ಮತ್ತು ಗೌರವನ್ನು ಕಾಪಾಡಬೇಕೆಂದು ಜಿಲ್ಲಾಧಿಕಾರಿ ಶಿವಾನಂದ ಕಾಪಶಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.




