ಎಪಿಎಂಸಿ ಕಾಯ್ದೆ ತಿದ್ದುಪಡಿ; ನಾಡಿನ ರೈತರನ್ನು ಸರ್ಕಾರ ಬಂಡವಾಳಶಾಹಿಗಳ ಗುಲಾಮರನ್ನಾಗಿ ಮಾಡಲು ಹೊರಟಿದೆ: ಸಿದ್ದರಾಮಯ್ಯ

Siddaramaih vijayaprabha Siddaramaih vijayaprabha

ಬೆಂಗಳೂರು: ಎಪಿಎಂಸಿ ಕಾಯ್ದೆಗೆ ತಿದ್ದುಪಡಿ ಮಾಡಲು ಹೊರಟಿರುವ ಸರ್ಕಾರದ ವಿರುದ್ಧ ಮಾಜಿ ಮುಖ್ಯಮಂತ್ರಿ, ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಕಿಡಿಕಾರಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಸಿದ್ದರಾಮಯ್ಯ ಅವರು, ರಾಜ್ಯ ಸರ್ಕಾರ ಎಪಿಎಂಸಿ ಕಾಯ್ದೆಗೆ ತಿದ್ದುಪಡಿ ತಂದಿರುವುದು ಸ್ವಪ್ರೇರಣೆಯಿಂದಲ್ಲ. ಕೇಂದ್ರ ಸರ್ಕಾರದ ಗೃಹ ಇಲಾಖೆ ಮತ್ತು ಕೃಷಿ ಸಚಿವಾಲಯದ ಒತ್ತಡಕ್ಕೆ ಮಣಿದು ಎಪಿಎಂಸಿ ಕಾಯಿದೆಗೆ ತಿದ್ದುಪಡಿ ತಂದು ನಾಡಿನ ರೈತರನ್ನು ಬಂಡವಾಳಶಾಹಿಗಳ ಗುಲಾಮರನ್ನಾಗಿ ಮಾಡಲು ಹೊರಟಿದೆ. ಇದನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ.

ಈಗಿನ ಎಪಿಎಂಸಿ ಕಾಯಿದೆಯ ಅನ್ವಯ ರೈತರು ಕೃಷಿ ಉತ್ಪನ್ನಗಳನ್ನು ಎಪಿಎಂಸಿ ಒಳಗೆ ವರ್ತಕರಿಗೆ ಇಲ್ಲವೇ ಹೊರಗೆ ಪರವಾನಗಿ ಇರುವ ವರ್ತಕರಿಗೆ ಮಾರಾಟ ಮಾಡಬಹುದಿತ್ತು. ತಿದ್ದುಪಡಿಯಿಂದಾಗಿ ಎಪಿಎಂಸಿ ಹೊರಗಿನ ವರ್ತಕರ ಮೇಲೆ ಸರ್ಕಾರಕ್ಕೆ ಯಾವ ನಿಯಂತ್ರಣ ಇರುವುದಿಲ್ಲ. ಹೀಗಿದ್ದಾಗ ರೈತರಿಗೆ ಎಲ್ಲಿದೆ ರಕ್ಷಣೆ?

Advertisement

ಆರಂಭದಲ್ಲಿ ರೈತರು ತಮ್ಮ ಉತ್ಪನ್ನಗಳಿಗೆ ಹೆಚ್ಚು ಬೆಲೆ ಸಿಗುತ್ತದೆ ಎಂದು ಖಾಸಗಿಯವರಿಗೆ ಮಾರಾಟ ಮಾಡುತ್ತಾರೆ, ಇದರಿಂದ ರಾಜ್ಯದಲ್ಲಿನ ಎಪಿಎಂಸಿ ಗಳು ಒಂದೊಂದಾಗಿ ಮುಚ್ಚಿಕೊಳ್ಳುತ್ತಾ ಸಾಗಿ ಕೊನೆಗೆ ರೈತರು ಅನಿವಾರ್ಯವಾಗಿ ಖಾಸಗಿಯವರನ್ನೆ ಅವಲಂಭಿಸಬೇಕಾಗುತ್ತದೆ.

ಒಮ್ಮೆ ಕೃಷಿ ಉತ್ಪನ್ನಗಳ ಖರೀದಿಯಲ್ಲಿ ಖಾಸಗಿ ಸಂಸ್ಥೆಗಳು ಅಥವಾ ವ್ಯಕ್ತಿಗಳು ಸಾರ್ವಭೌಮತ್ವ ಸಾಧಿಸಿದರೆಂದರೆ ನಂತರ ಅವರನ್ನು ನಿಯಂತ್ರಿಸುವ ಯಾವ ನಿಯಮಗಳು ಅಥವಾ ಅಧಿಕಾರ ಸರ್ಕಾರದ ಬಳಿ ಇರುವುದಿಲ್ಲ. ಇದು ಭವಿಷ್ಯದಲ್ಲಿ ಶೋಷಣೆಗೆ ದಾರಿ ಮಾಡಿಕೊಡುತ್ತದೆ

ರೈತರ ಬೆಳೆಗಳಿಗೆ ನ್ಯಾಯ ದೊರಕಿಸಿಕೊಡಬೇಕು ಎಂಬ ನಿಜವಾದ ಕಾಳಜಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ಇದ್ದರೆ ಸ್ವಾಮಿನಾಥನ್ ವರದಿಯನ್ನು ಜಾರಿ ಮಾಡಿ. ಕನಿಷ್ಠ ಬೆಂಬಲ ಬೆಲೆಯನ್ನು ಏರಿಸಿ, ತೂಕ ಮತ್ತು ಇತರೆಡೆ ರೈತರಿಗೆ ಆಗುತ್ತಿರುವ ಅನ್ಯಾಯವನ್ನು ಸರಿಪಡಿಸಿ.

ಎಪಿಎಂಸಿ ಗಳಿಂದ ಸರ್ಕಾರಕ್ಕೆ ವಾರ್ಷಿಕ ರೂ.600 ಕೋಟಿ ಲಾಭವಿದೆ, ಇದರ ಜೊತೆಗೆ ರೈತರ ಬೆಳೆಗಳಿಗೂ ಅರ್ಹ ಬೆಲೆ ಸಿಗುತ್ತಿದೆ. ಕಾಯ್ದೆಗೆ ತಿದ್ದುಪಡಿ ತರುವುದರಿಂದ ಎಲ್ಲಾ ಎಪಿಎಂಸಿ ಗಳು ಬಾಗಿಲು ಹಾಕಿದರೆ ಸರ್ಕಾರಕ್ಕಾಗುವ ಈ ನಷ್ಟವನ್ನು ಖಾಸಗಿ ಕಂಪನೆಗಳು ತುಂಬಿಕೊಡುತ್ತವೆಯೇ?

ರೈತರಿಗೆ ಮುಕ್ತ ಮಾರುಕಟ್ಟೆ ಕಲ್ಪಿಸುವುದರಿಂದ ನ್ಯಾಯಯುತ ಬೆಲೆ ಸಿಗುತ್ತದೆ ಎಂಬುದು ಸರ್ಕಾರದ ವಾದ. ಹಾಗಾದರೆ 1966ರ ಪೂರ್ವದಲ್ಲೂ ಮುಕ್ತ ಮಾರುಕಟ್ಟೆಯಿತ್ತು, ಆಗ ರೈತರಿಗೆ ನ್ಯಾಯಯುತ ಬೆಲೆ ಸಿಕ್ಕಿದ್ದರೆ ಎಪಿಎಂಸಿ ಕಾಯ್ದೆ ಯಾಕೆ ಜಾರಿಗೆ ಬರುತ್ತಿತ್ತು? ರೈತರ ಮೇಲಿನ ಶೋಷಣೆ ಹೆಚ್ಚಿದ್ದಕ್ಕೆ ಕಾಯ್ದೆ ಜಾರಿಗೆ ಬಂದದ್ದಲ್ಲವೇ.

ರಾಜ್ಯಪಟ್ಟಿಯಲ್ಲಿರುವ ಎಪಿಎಂಸಿ ಕಾಯಿದೆಗೆ ಮಾದರಿ ತಿದ್ದುಪಡಿ ರೂಪಿಸಿ, ಇದನ್ನು ಯಥಾವತ್ತಾಗಿ ಜಾರಿಗೆ ತನ್ನಿ ಎಂದು ಕೇಂದ್ರ ಸರ್ಕಾರ ಹೇಳುವುದು ಭಾರತದ ಒಕ್ಕೂಟ ವ್ಯವಸ್ಥೆಗೆ ಮಾಡುತ್ತಿರುವ ಅಪಚಾರ. ಕೇಂದ್ರಕ್ಕೆ ಈ ಅಧಿಕಾರ ಕೊಟ್ಟವರು ಯಾರು?

ಎಪಿಎಂಸಿ ಗಳ ಮೇಲೆ ಸರ್ಕಾರದ ನಿಯಂತ್ರಣವಿದೆ, ತಿದ್ದುಪಡಿ ಜಾರಿಯಾದರೆ ರೈತರ ಉತ್ಪನ್ನಗಳನ್ನು ಖರೀದಿಸುವ ಖಾಸಗಿ ಸಂಸ್ಥೆ ಅಥವಾ ವ್ಯಕ್ತಿಗಳ ಮೇಲೆ ಸರ್ಕಾರಕ್ಕೆ ಯಾವುದೇ ರೀತಿಯ ನಿಯಂತ್ರಣ ಇರುವುದಿಲ್ಲ. ಭವಿಷ್ಯದಲ್ಲಿ ಖಾಸಗಿಯವರೇ ರೈತರ ಶೋಷಣೆಗೆ ಇಳಿದರೆ ನ್ಯಾಯಕ್ಕಾಗಿ ರೈತರು ಯಾರನ್ನು ಕೇಳಬೇಕು? ಎಂದು ಸಿದ್ದರಾಮಯ್ಯ ಅವರು ಸರ್ಕಾರದ ವಿರುದ್ಧ ಸರಣಿ ಟ್ವೀಟ್ ಮಾಡಿ ಕಿಡಿಕಾರಿದ್ದಾರೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.
Add a comment

Leave a Reply

Your email address will not be published. Required fields are marked *

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement