ಬೆಂಗಳೂರು: ರಾಜ್ಯದ ಕರಾವಳಿ ಮತ್ತು ಒಳನಾಡಿನ ಹಲವೆಡೆ ಮಳೆಯಾಗಿದ್ದು, ಇನ್ನೂ ಹಲವು ದಿನಗಳ ಕಾಲ ಮಳೆ ಮುಂದುವರೆಯಲಿದ್ದು, ಜೂನ್ 29ಕ್ಕೆ ಕರಾವಳಿಯ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಇನ್ನು, ಚಿಕ್ಕಮಗಳೂರು ಜಿಲ್ಲೆ ಕೊಟ್ಟಿಗೆಹಾರದಲ್ಲಿ 13 ಸೆಂ.ಮೀ. ಮಳೆಯಾಗಿದ್ದರೆ, ಉಡುಪಿ ಜಿಲ್ಲೆಯ ಸಿದ್ದಾಪುರ 6 ಸೆಂ.ಮೀ, ಉತ್ತರ ಕನ್ನಡ ಜಿಲ್ಲೆ ಸಿದ್ದಾಪುರ, ಕೊಡಗು ಜಿಲ್ಲೆ ಪೊನ್ನಂಪೇಟೆಯಲ್ಲಿ ತಲಾ 5 ಸೆಂ.ಮೀ, ಕೊಡಗು ಜಿಲ್ಲೆ ಭಾಗಮಂಡಲದಲ್ಲಿ ತಲಾ 4 ಸೆಂ.ಮೀ ಮಳೆಯಾಗಿದ್ದು, ಇಂದು ಮತ್ತು ನಾಳೆ ಕರಾವಳಿಯ ಎಲ್ಲಾ ಜಿಲ್ಲೆಗಳಿಗೆ ಯಲ್ಲೊ ಅಲರ್ಟ್ ನೀಡಲಾಗಿದೆ.
ಇದಷ್ಟೇ ಅಲ್ಲದೆ ಜೂನ್ 30 ಮತ್ತು ಜುಲೈ 1ರಂದು ಕರಾವಳಿ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದ್ದು, ಕರಾವಳಿ ಭಾಗದಲ್ಲಿ ಗುಡುಗು ಸಹಿತ ಮಳೆ ನಿರೀಕ್ಷಿಸಲಾಗಿದೆ.