ಮಂಡ್ಯ: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರ ಕೊನೆಯ ದಿನದ ಬಗ್ಗೆ ಚರ್ಚಿಸುವ ಅವಶ್ಯಕತೆ ನನಗಿಲ್ಲ. ಅವರು ಎಲ್ಲಿ ಮಣ್ಣಾಗುವರೋ ನನಗೆ ಸಂಬಂಧವಿಲ್ಲ ಎಂದು ಕೃಷಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಟೀಕೆ ಮಾಡಿದ್ದಾರೆ.
ನಗರದ ಪ್ರವಾಸಿ ಮಂದಿರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಹಾಸನ ನನ್ನ ಜನ್ಮಭೂಮಿ, ರಾಮನಗರದಲ್ಲಿ ಮಣ್ಣಾಗುತ್ತೇನೆ ಎಂಬ ಹೆಚ್ಡಿಕೆ ಹೇಳಿಕೆ ಕುರಿತು ಪ್ರತಿಕ್ರಿಯಿಸಿ, ಅವರು ಮಣ್ಣಾಗುವ ವಿಷಯ ನನಗೆ ಸಂಬಂಧಿಸಿದ್ದಲ್ಲ ಎಂದರು.
ಪ್ರಜಾಪ್ರಭುತ್ವದಲ್ಲಿ ಯಾರು ಎಲ್ಲಿ ಬೇಕಾದರೂ ಸ್ಪರ್ಧಿಸಬಹುದು. ಈಗ ಅವರ ಮಗ ಚನ್ನಪಟ್ಟಣದಿಂದ ಸ್ಪರ್ಧಿಸಿದ್ದಾರೆ. ಮೂರೂ ಕ್ಷೇತ್ರಗಳಲ್ಲಿ ಗೆಲ್ಲುವುದು ನಮ್ಮ ಮುಖ್ಯ ಗುರಿ. ಚನ್ನಪಟ್ಟಣ ಚುನಾವಣೆಯ ಜವಾಬ್ದಾರಿಯನ್ನು ನನಗೆ ಕೊಟ್ಟಿಲ್ಲ. ಡಿ.ಕೆ.ಶಿವಕುಮಾರ್ ಚುನಾವಣೆಯ ನೇತೃತ್ವ ವಹಿಸುತ್ತಾರೆ. ಚುನಾವಣೆ ಜವಾಬ್ದಾರಿ ನಿರ್ವಹಿಸುತ್ತಿರುವ ಸಚಿವರಲ್ಲಿ ನಾನೂ ಒಬ್ಬ. ಅವರು ಕೊಟ್ಟ ಜಾಗದಲ್ಲಿ ಕೆಲಸ ಮಾಡುತ್ತೇನೆ. ನ.3 ರಿಂದ 11ರ ವರೆಗೆ ಪ್ರಚಾರ ಮಾಡುವೆ ಎಂದಿದ್ದಾರೆ.
ರಾಮನಗರ ನಗರಸಭೆಯನ್ನು ಮಹಾನಗರ ಪಾಲಿಕೆ ಮಾಡುವ ಕುಮಾರಸ್ವಾಮಿ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿ, ಮಹಾನಗರ ಪಾಲಿಕೆ ಮಾಡುವುದು ರಾಜ್ಯ ಸರ್ಕಾರ. ಕೇಂದ್ರ ಸರ್ಕಾರ ಅಲ್ಲ. ಅಷ್ಟಕ್ಕೂ, ಅವರು ಎರಡು ಬಾರಿ ಸಿಎಂ ಆಗಿದ್ದರೂ ಆ ಕೆಲಸ ಮಾಡಲಿಲ್ಲ. ಈಗ ಮಾಡುತ್ತೇನೆ ಎನ್ನುವುದು ಎಷ್ಟರ ಮಟ್ಟಿಗೆ ಸತ್ಯ?. ಮಹಾನಗರ ಪಾಲಿಕೆ ಮಾಡುವುದಕ್ಕೂ ಮುನ್ನ ರಾಜ್ಯದ ಕ್ಯಾಬಿನೆಟ್ ಮುಂದೆ ಚರ್ಚೆಯಾಗಬೇಕು ಎಂದು ಹೇಳಿದ್ದಾರೆ.