ಕಲಿಯುಗದ ಕುಡುಕ ಇಂದಿಗೂ ನಾಡಿನ ರಂಗಾಸಕ್ತರ ಮನದಲ್ಲಿ ಹಸಿರಾಗಿದ್ದು, ಈ ನಾಟಕದ ಮೂಲಕ ಬದುಕಿನ ತತ್ವ ಸಾರಿದ್ದ ನಾಡಿನ ಜನಪ್ರಿಯ ಹಿರಿಯ ರಂಗ ಕಲಾವಿದ ಹಾಗೂ ಸ್ಯಾಂಡಲ್ವುಡ್ನ ಹಾಸ್ಯ ನಟ ರಾಜು ತಾಳಿಕೋಟೆ(62) ಹೃದಯಾಘಾತದಿಂದ ನಿಧನರಾಗಿದ್ದಾರೆ.
ನಿನ್ನೆ ಸಂಭವಿಸಿದ ಹೃದಯಾಘಾತದಿಂದ ಮಣಿಪಾಲ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ, ವೈದ್ಯರ ನಿರಂತರ ಚಿಕಿತ್ಸೆ ನಂತರವೂ ಅವರು ಚಿಕಿತ್ಸೆಗೆ ಸ್ಪಂದಿಸದೇ ಇದೀಗ ನಿಧನರಾಗಿದ್ದಾರೆ. ವಿಜಯಪುರ ಜಿಲ್ಲೆಯ ಸಿಂದಗಿ ತಾಲ್ಲೂಕಿನ ಚಿಕ್ಕಸಿಂದಗಿ ಗ್ರಾಮದ ಮೂಲದವರಾಗಿದ್ದ ಅವರು, ಚಲನಚಿತ್ರದಲ್ಲಿ ಪ್ರಸಿದ್ಧರಾದ ನಂತರ ತಾಳಿಕೋಟಿ ನಗರದಲ್ಲಿ ವಾಸವಾಗಿದ್ದರು.
ವಿಜಯಪುರ ಜಿಲ್ಲೆಯ ಸಿಂದಗಿ ತಾಲ್ಲೂಕಿನ ಚಿಕ್ಕಸಿಂದಗಿ ಮೂಲದವರು. ನಿರ್ದೇಶಕ ಯೋಗರಾಜ್ ಭಟ್ ಅವರ ‘ಮನಸಾರೆ’ (2009) ಚಿತ್ರದ ಮೂಲಕ ಅವರು ಜನಪ್ರಿಯತೆ ಗಳಿಸಿದರು. ನಂತರ ‘ಪಂಚರಂಗಿ’, ‘ಮತ್ತೊಂದ್ ಮದುವೇನಾ..!’ ಮತ್ತು ‘ಮೈನಾ’ ಸೇರಿದಂತೆ ಹಲವಾರು ಚಿತ್ರಗಳಲ್ಲಿ ತಮ್ಮದೇ ಆದ ವಿಶಿಷ್ಟ ಹಾಸ್ಯ ಶೈಲಿಯ ಮೂಲಕ ಪ್ರೇಕ್ಷಕರ ಗಮನ ಸೆಳೆದಿದ್ದರು. ರಾಜು ತಾಳಿಕೋಟಿ ನಿಧನಕ್ಕೆ ಕನ್ನಡ ಚಿತ್ರರಂಗ ಮತ್ತು ಉತ್ತರ ಕರ್ನಾಟಕದ ರಂಗಭೂಮಿ ಕಂಬನಿ ಮಿಡಿದಿದೆ.
ರಾಜು ತಾಳಿಕೋಟಿಯವರ ಮೂಲ ಹೆಸರು ರಾಜೇಸಾಬ ಮಕ್ತುಮಸಾಬ್ ತಾಳಿಕೋಟಿ ಎಂದಾಗಿತ್ತು. ಅವರು ಕೇವಲ ನಟನಾಗಿರದೆ, ತಾಳಿಕೋಟಿಯ ಪ್ರಸಿದ್ಧ ಖಾಸ್ಗತೇಶ್ವರ ನಾಟಕ ಮಂಡಳಿಯ ಮಾಲೀಕರೂ ಆಗಿದ್ದರು. ಅವರ ಜೀವನದ ಬಹುಪಾಲು ಸಮಯವನ್ನು ಅವರು ಉತ್ತರ ಕರ್ನಾಟಕದ ಹಳ್ಳಿಗಳಲ್ಲಿ ನಾಟಕಗಳ ಮೂಲಕ ಜನರನ್ನು ರಂಜಿಸುವುದರಲ್ಲಿಯೇ ಕಳೆದಿದ್ದರು. ಕುಡುಕನ ಪಾತ್ರಗಳಲ್ಲಿ ಇವರ ಅಭಿನಯ ಅತ್ಯಂತ ಲೀಲಾಜಾಲವಾಗಿರುತ್ತಿತ್ತು. ‘ಕಲಿಯುಗದ ಕುಡುಕ’, ‘ಕುಡುಕರ ಸಾಮ್ರಾಜ್ಯ’, ಮತ್ತು ‘ಅಸಲಿ ಕುಡುಕ’ ಇವರ ಪ್ರಖ್ಯಾತ ನಾಟಕಗಳಾಗಿವೆ.
ರಾಜು ತಾಳಿಕೋಟಿ ಉತ್ತರ ಕರ್ನಾಟಕದ ಶೈಲಿಯ ಭಾಷೆ, ಉಡುಗೆ-ತೊಡುಗೆಯೊಂದಿಗೆ ಹಾಸ್ಯ ಪಾತ್ರಗಳನ್ನು ಮಾಡುತ್ತಿದ್ದರು. ಸಿನಿಮಾ, ರಂಗಭೂಮಿಯಲ್ಲಿ ಅಪಾರ ಜನಪ್ರಿಯತೆ ಗಳಿಸಿದ್ದರು. ಅದರಲ್ಲೂ ವಿಶೇಷವಾಗಿ, ಕುಡುಕನ ಪಾತ್ರಗಳಲ್ಲಿ ಅವರ ಅಭಿನಯ ಅತ್ಯಂತ ಜನಪ್ರಿಯವಾಗಿತ್ತು. ‘ಕಲಿಯುಗದ ಕುಡುಕ’, ‘ಕುಡುಕರ ಸಾಮ್ರಾಜ್ಯ’, ‘ಅಸಲಿ ಕುಡುಕ’ ಅವರ ಪ್ರಖ್ಯಾತ ನಾಟಕಗಳಾಗಿದ್ದು, ಈ ನಾಟಕಗಳ ಆಡಿಯೊ ಕ್ಯಾಸೆಟ್ಗಳು ಕೂಡ ಆ ಕಾಲದಲ್ಲಿ ಉತ್ತರ ಕರ್ನಾಟಕ ಭಾಗದಲ್ಲಿ ಮನೆಮಾತಾಗಿದ್ದವು.
ಹೋಗಿ ಬನ್ನಿ ರಾಜಣ್ಣ: ಯೋಗರಾಜ್ ಭಟ್ ಭಾವುಕ ಪತ್ರ
ಖ್ಯಾತ ಹಾಸ್ಯನಟ ರಾಜು ತಾಳಿಕೋಟೆ ನಿಧನಕ್ಕೆ ನಿರ್ದೇಶಕ ಯೋಗರಾಜ್ ಭಟ್ ಕಂಬನಿ ಮಿಡಿದಿದ್ದಾರೆ. ‘ನಮಸ್ತೆ.. ಬಯಲು ಸೀಮೆಯ ಹೃದಯಕ್ಕೆ ನಮನ. ನೀವೆಂದರೆ ತುಂಬಾ ಪ್ರೀತಿ, ತುಂಬಾ ಖುಷಿ, ತುಂಬಾ ನೆನಪು. ನೀವೊಬ್ಬ ನಾಡು ಕಂಡ ಉತ್ಕೃಷ್ಟ ಕಲಾವಿದ. ಹೋಗಿಬನ್ನಿ, ಇದು ಸಾವಲ್ಲ ನಿಮ್ಮ ಹುಟ್ಟು. ನಮನ + ಧನ್ಯವಾದ ರಾಜಣ್ಣ’ ಎಂದು ಯೋಗರಾಜ್ ಭಟ್ ತಮ್ಮ ಫೇಸ್ಬುಕ್ನಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ.




