ನವದೆಹಲಿ: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರಕ್ಕೆ (ಮುಡಾ) ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಇತರರನ್ನು ಒಳಗೊಂಡ ಸುಮಾರು 300 ಕೋಟಿ ರೂಪಾಯಿ ಮೌಲ್ಯದ 140ಕ್ಕೂ ಹೆಚ್ಚು ಸ್ಥಿರಾಸ್ತಿಗಳನ್ನು ಮುಟ್ಟುಗೋಲು ಹಾಕಿಕೊಂಡಿರುವುದಾಗಿ ಜಾರಿ ನಿರ್ದೇಶನಾಲಯ (ಇಡಿ) ತಿಳಿಸಿದೆ.
ಮುಡಾ ಭೂ ಹಂಚಿಕೆಯಲ್ಲಿ ಅಕ್ರಮ ಎಸಗಿದೆ ಎಂಬ ಆರೋಪದ ಮೇಲೆ ಮನಿ ಲಾಂಡರಿಂಗ್ ತನಿಖೆಯ ಭಾಗವಾಗಿ ಈ ಮುಟ್ಟುಗೋಲು ಹಾಕಿಕೊಳ್ಳಲಾಗಿದೆ. ಮುಟ್ಟುಗೋಲು ಹಾಕಿಕೊಂಡ ಆಸ್ತಿಗಳನ್ನು ರಿಯಲ್ ಎಸ್ಟೇಟ್ ಉದ್ಯಮಿಗಳು ಮತ್ತು ಏಜೆಂಟರಾಗಿ ಕೆಲಸ ಮಾಡುತ್ತಿರುವ ವಿವಿಧ ವ್ಯಕ್ತಿಗಳ ಹೆಸರಿನಲ್ಲಿ ನೋಂದಾಯಿಸಲಾಗಿದೆ ಎಂದು ಫೆಡರಲ್ ಏಜೆನ್ಸಿ ಹೇಳಿಕೆಯಲ್ಲಿ ತಿಳಿಸಿದೆ.
ತಮ್ಮ ಪತ್ನಿ ಬಿ.ಎಂ.ಪಾರ್ವತಿ ಅವರ ಹೆಸರಿನಲ್ಲಿ ಇರುವ 14 ನಿವೇಶನಗಳಿಗೆ ಪರಿಹಾರ ಪಡೆಯಲು ಸಿದ್ದರಾಮಯ್ಯ ತಮ್ಮ ರಾಜಕೀಯ ಪ್ರಭಾವವನ್ನು ಬಳಸಿಕೊಂಡಿದ್ದಾರೆ ಎಂದು ಆರೋಪಿಸಲಾಗಿದೆ. ಬಿ.ಎಂ.ಪಾರ್ವತಿ ಅವರ ಹೆಸರಿನಲ್ಲಿದ್ದ 3 ಎಕರೆ 16 ಗುಂಟಾ ಭೂಮಿಯನ್ನು ಮುಡಾ ಸ್ವಾಧೀನಪಡಿಸಿಕೊಂಡಿತು.
ಈ ಭೂಮಿಯನ್ನು ಆರಂಭದಲ್ಲಿ 3,24,700 ರೂಪಾಯಿಗೆ ಮುಡಾ ಸ್ವಾಧೀನಪಡಿಸಿಕೊಂಡಿತ್ತು. ಆದರೆ ಪರಿಹಾರವಾಗಿ ಐಷಾರಾಮಿ ಪ್ರದೇಶದಲ್ಲಿ 14 ಸೈಟ್ಗಳನ್ನು ರೂಪದಲ್ಲಿ ನೀಡಿರುವುದು 56 ಕೋಟಿ ರೂ. ಬೆಲೆಬಾಳುತ್ತದೆ ಎಂದು ಆರೋಪಿಸಿದೆ.
ಪಾರ್ವತಿ ಅವರಿಗೆ ಪರಿಹಾರ ಸೈಟ್ಗಳನ್ನು ಅಕ್ರಮವಾಗಿ ಹಂಚಿಕೆ ಮಾಡುವಲ್ಲಿ ಮುಡಾ ಮಾಜಿ ಆಯುಕ್ತ ಡಿ. ಬಿ. ನಟೇಶ್ ಅವರ ಪಾತ್ರವು ಪ್ರಮುಖ ಪಾತ್ರ ವಹಿಸಿದೆ ಎಂದು ಅದು ಹೇಳಿದೆ.




