ಶಿವಮೊಗ್ಗ: ಮೊಬೈಲ್ ಹೆಚ್ಚು ನೋಡಬೇಡ ಎಂದು ಪೋಷಕರು ಬುದ್ಧಿ ಹೇಳಿದ್ದಕ್ಕೆ ವಿದ್ಯಾರ್ಥಿನಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಶಿವಮೊಗ್ಗದ ಹಾರನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಧನುಶ್ರೀ (20) ಮೃತ ಯುವತಿ ಎಂದು ಗುರುತಿಸಲಾಗಿದೆ. ಶಿವಮೊಗ್ಗದಲ್ಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ದ್ವಿತೀಯ ವರ್ಷದ ಪದವಿ ವ್ಯಾಸಂಗ ಮಾಡುತ್ತಿದ್ದಳು. ಹೆಚ್ಚಾಗಿ ಮೊಬೈಲ್ ಬಳಕೆ ಮಾಡುತ್ತಿದ್ದಳು. ಹೀಗಾಗಿ ಪೋಷಕರು ಹೆಚ್ಚು ಮೊಬೈಲ್ ಬಳಕೆ ಮಾಡಬೇಡ ಎಂದು ಬುದ್ಧಿ ಹೇಳಿದ್ದಾರೆ. ಇದರಿಂದ ಮನನೊಂದ ಯುವತಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎನ್ನಲಾಗಿದೆ.
ಯುವತಿ ಹೆಚ್ಚಾಗಿ ಮೊಬೈಲ್ ಬಳಕೆ ಮಾಡುತ್ತಿದ್ದಳು. ಇದನ್ನು ಗಮನಿಸಿದ್ದ ಪೋಷಕರು ಓದಿನ ಕಡೆ ಗಮನ ಕೊಡು , ಜಾಸ್ತಿ ಮೊಬೈಲ್ ಬಳಸಬೇಡ ಎಂದು ಬುದ್ದಿವಾದ ಹೇಳಿದ್ದಾರೆ. ಇದರಿಂದ ಮನನೊಂದ ಯುವತಿ ಕಳೆದ 3 ದಿನದ ಹಿಂದೆ ಮನೆಯಲ್ಲಿ ವಿಷ ಸೇವಿಸಿದ್ದಳು.
ವಿಷ ಸೇವಿಸಿದ್ದ ಯುವತಿಯನ್ನು ಚಿಕಿತ್ಸೆಗೆ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಇಂದು ಯುವತಿ ಮೃತಪಟ್ಟಿದ್ದಾಳೆ. ಈ ಸಂಬಂಧ ಕುಂಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.