ವಿಜಯಪ್ರಭ ವಿಶೇಷ, ದಾವಣಗೆರೆ: ಭೂ ಸುಧಾರಣೆ ತಿದ್ದುಪಡಿ ಆಯ್ದೆ, ಎಪಿಎಂಸಿ ಕಾಯ್ದೆ ಸೇರಿದಂತೆ ವಿವಿಧ ಕಾಯ್ದೆಗಳ ಜಾರಿಗೆ ಮುಂದಾಗಿರುವ ರಾಜ್ಯ ಹಾಗೂ ಕೇಂದ್ರ ಸರ್ಕಾರದ ಕ್ರಮದ ವಿರುದ್ಧ ರೈತರು ತಿರುಗಿ ಬಿದ್ದಿದ್ದು, ಇಂದು ರಾಜ್ಯಾಂದ್ಯತ ಬಂದ್ಗೆ ಕರೆ ನೀಡಿದ್ದಾರೆ. ಬಂದ್ ಗೆ ಹಲವು ಸಂಘಟನೆಗಳು ಕೂಡ ಬೆಂಬಲ ನೀಡಿವೆ. ಕೆಲ ಸಂಘಟನೆಗಳು ನೈತಿಕ ಬೆಂಬಲ ವ್ಯವಕ್ತಪಡಿಸಿವೆ. ಸದ್ಯ ದಾವಣಗೆರೆ ಜಿಲ್ಲೆಯಲ್ಲಿ ಯಾವ ರೀತಿ ಪ್ರತಿಕ್ರಿಯೆ ವ್ಯಕ್ತವಾಗಿದೆ ಎಂಬುದರ ಗ್ರೌಂಡ್ ರಿಪೋರ್ಟ್ ನಿಮ್ಮ ವಿಜಯಪ್ರಭ.ಕಾಂನಲ್ಲಿ..
ದಾವಣಗೆರೆ, ಜಗಳೂರು, ಹೊನ್ನಾಳಿ, ಚನ್ನಗಿರಿ ತಾಲೂಕಿನಲ್ಲಿ ಬೆಳಗ್ಗೆ ಬಂದ್ಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಯಿತು. ಬೆಳಗ್ಗೆಯೇ ಬೀದಿಗಿಳಿದ ರೈತ ಸಂಘಟನೆಗಳು, ಕಾಂಗ್ರೆಸ್, ಜೆಡಿಎಸ್, ಕನ್ನಡಪರ ಸಂಘಟನೆ ಕಾರ್ಯಕರ್ತರು ಬಂದ್ಗೆ ಸಹರಿಸುವಂತೆ ಜನರಲ್ಲಿ ಮನವಿ ಮಾಡಿದರು. ಬೈಕ್ನಲ್ಲಿ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಸಂಚಾರ ಸರಾಗ; ಸಾಥ್ ನೀಡದ ಜನ !
ರೈತರಿಗೆ ಮರಣ ಶಾಸನವಾಗಿರುವ ಕಾಯ್ದೆಗಳನ್ನು ಸರ್ಕಾರ ಹಿಂಪಡೆಯಬೇಕು ಎಂದು ಆಗ್ರಹಿಸಿ ರೈತಸಂಘಟನೆಗಳು ಬಂದ್ ಗೆ ಕರೆ ನೀಡಿದ್ದವು. ಆದರೆ ಬೆಳಗ್ಗೆ ಜನರಿಂದ ನೀರಸ ಪ್ರತಿಕ್ರಿಯೆ ವ್ಯಕ್ತವಾಯಿತು. ಅಂಗಡಿ ಮುಂಗಟ್ಟುಗಳು ಎಂದಿನಂತೆ ತೆರೆದಿದ್ದವು. ಬಸ್ ಹೊರತು ಪಡಿಸಿ ವಾಹನ ಸಂಚಾರ ಎಂದಿನಂತೆ ಸರಾಗವಾಗಿತ್ತು.
ಅಲ್ಲಲ್ಲಿ ಪ್ರತಿಭಟನೆ
ದಾವಣಗೆರೆ, ಹರಪನಹಳ್ಳಿ, ಚನ್ನಗಿರಿ, ಹೊನ್ನಾಳಿ, ನ್ಯಾಮತಿ ಪಟ್ಟಣದಲ್ಲಿ ರೈತ ಸಂಘಟನೆ, ಕರವೇ, ಕಾಂಗ್ರೆಸ್ ಹಾಗೂ ಜೆಡಿಎಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.
ಹಳ್ಳಿಗಳಲ್ಲಿ ಬಂದ್ ಗೆ ಉತ್ತಮ ಪ್ರತಿಕ್ರಿಯೆ
ಬೆಳಗ್ಗೆ ನಗರ ಪ್ರದೇಶಗಳಿಗೆ ಹೋಲಿಸಿದರೆ ಹಳ್ಳಿಗಳಲ್ಲಿ ಬಂದ್ಗೆ ತುಸು ಉತ್ತಮ ಪ್ರತಿಕ್ರಿಯೆ ವ್ಯಕ್ತವಾಯಿತು. ಕೆಲ ಅಂಗಡಿಗಳು ಬಾಗಿಲು ಹಾಕಿದ್ದವು. ವಾಹನ ಸಂಚಾರ ಕಡಿಮೆ ಇತ್ತು. ಹರಪನಹಳ್ಳಿ ತಾಲೂಕಿನ ಅರಸೀಕೆರೆ, ಉಚ್ಚಂಗಿದುರ್ಗ, ಹಲವಾಗಲು ಸೇರಿದಂತೆ ವಿವಿಧೆಡೆ ಬೆಳಗ್ಗೆ ಬಂದ್ ವಾತಾವರಣ ಗೋಚರಿಸಿತು.
ಒಟ್ಟಾರೆ ದಾವಣಗೆರೆ ಜಿಲ್ಲೆಯಲ್ಲಿ ಬಂದ್ ಗೆ ಬೆಳಗ್ಗೆ ಮಿಶ್ರಪ್ರತಿಕ್ರಿಯೆ ವ್ಯಕ್ತವಾಯಿತು. ಮಧ್ಯಾಹ್ನ ಹಾಗೂ ಸಂಜೆಯಲ್ಲಿ ಯಾವ ರೀತಿ ಪ್ರತಿಕ್ರಿಯೆ ವ್ಯಕ್ತವಾಗುತ್ತದೆ ಎಂಬುದರ ವಸ್ತು ವರದಿ ನೀಡಲಾಗುವುದು.