ಬೆಂಗಳೂರು: ಪ್ರಸಕ್ತ ಸಾಲಿನ ದೀಪಾವಳಿ ಹಬ್ಬದ ಪ್ರಯುಕ್ತ ಸಾರ್ವಜನಿಕರು ತಮ್ಮ ಸ್ವಂತ ಊರುಗಳಿಗೆ ತೆರಳುವುದರಿಂದ, ವಾ.ಕ.ರ.ಸಾ.ಸಂಸ್ಥೆ ವ್ಯಾಪ್ತಿಯ ಹುಬ್ಬಳ್ಳಿ, ಧಾರವಾಡ, ಗದಗ, ಬೆಳಗಾವಿ, ಉತ್ತರ ಕನ್ನಡ, ಹಾವೇರಿ, ಚಿಕ್ಕೋಡಿ ಮತ್ತು ಬಾಗಲಕೋಟೆ ವಿಭಾಗಗಳಿಂದ ಸುಮಾರು 300ಕ್ಕೂ ಅಧಿಕ ಹೆಚ್ಚುವರಿ ವಿಶೇಷ ಸಾರಿಗೆಗಳನ್ನು ಕಾರ್ಯಾಚರಣೆ ಮಾಡಲಾಗುತ್ತದೆ.
ಅಕ್ಟೋಬರ್ 31 ನರಕ ಚತುರ್ದಶಿ, ನವೆಂಬರ್ 1 ರಂದು ಕನ್ನಡ ರಾಜ್ಯೋತ್ಸವ, ನವೆಂಬರ್ 2 ರಂದು ಬಲಿಪಾಡ್ಯಮಿ ಹಾಗೂ ನವೆಂಬರ್ 3 ರಂದು ರವಿವಾರ ಇರುವುದರಿಂದ ಬೆಂಗಳೂರು ಮತ್ತು ಇತರೆ ಪ್ರಮುಖ ಸ್ಥಳಗಳಿಂದ ಹೆಚ್ಚಿನ ಪ್ರಯಾಣಿಕರು ತಮ್ಮ ತಮ್ಮ ಊರುಗಳಿಗೆ ತೆರಳಲು ಹೆಚ್ಚುವರಿ ಸಾರಿಗೆಗಳನ್ನು ಕಾರ್ಯಾಚರಣೆ ಮಾಡಲಾಗುತ್ತಿದೆ.
ಬೆಂಗಳೂರಿನಿಂದ ರಾಜ್ಯ/ಅಂತರರಾಜ್ಯದ ವಿವಿಧ ಸ್ಥಳಗಳಿಗೆ ತೆರಳಲು ಅ.29 ರಿಂದ ನ.1 ರವರೆಗೆ ಹೆಚ್ಚುವರಿ ವಿಶೇಷ ಸಾರಿಗೆ ಸೌಲಭ್ಯವನ್ನು ಕಲ್ಪಿಸಲಾಗಿದೆ. ಹಬ್ಬ ಮುಗಿದ ಮೇಲೆ ನ.3 ಹಾಗೂ 4 ರಂದು ಮತ್ತು ನಂತರದ ದಿನಗಳಂದು ಪ್ರಮುಖ ಸ್ಥಳಗಳಿಂದ ಜನದಟ್ಟಣೆಗೆ ಅನುಗುಣವಾಗಿ ಹೆಚ್ಚುವರಿ ಸಾರಿಗೆಗಳನ್ನು ಕಾರ್ಯಾಚರಣೆಗೊಳಿಸಲಾಗುವುದು.
ಈ ವಿಶೇಷ ಸಾರಿಗೆ ಬಸ್ಗಳ ಸೇವೆಯ ಸದುಪಯೋಗಪಡಿಸಿಕೊಳ್ಳುವ ಮೂಲಕ, ಸುಖಕರ ಹಾಗೂ ಸುರಕ್ಷಿತ ಪ್ರಯಾಣಕ್ಕಾಗಿ ಸರ್ಕಾರಿ ಸಾರಿಗೆ ಸಂಸ್ಥೆಯ ಬಸ್ಸುಗಳಲ್ಲಿಯೇ ಪ್ರಯಾಣಿಸುವಂತೆ ಮತ್ತು ವಿಶೇಷ ಹೆಚ್ಚುವರಿ ಸಾರಿಗೆಗಳ ಪ್ರಯೋಜನ ಪಡೆದುಕೊಳ್ಳುವಂತೆ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯು ತಮ್ಮ ಪ್ರಕಟಣೆಯಲ್ಲಿ ತಿಳಿಸಿದೆ.