ಬೆಂಗಳೂರು: ಇಬ್ಬರು ಮಕ್ಕಳಿಗೆ ಸರ್ಕಾರಿ ಉದ್ಯೋಗ ಕೊಡಿಸುವುದಾಗಿ ಮಹಿಳೆಯೊಬ್ಬರಿಂದ ₹47 ಲಕ್ಷ ಹಾಗೂ 857 ಗ್ರಾಂ ಚಿನ್ನಾಭರಣ ಪಡೆದು ವಂಚಿಸಿದ ಆರೋಪದಡಿ ನಗರ ಶಸಸ್ತ್ರ ಮೀಸಲು ಪಡೆ(ಸಿಎಆರ್) ಹೆಡ್ ಕಾನ್ಸ್ಟೇಬಲ್ ಸೇರಿ ಮೂವರ ವಿರುದ್ಧ ನಂದಿನಿ ಲೇಔಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ವಂಚನೆಗೆ ಒಗೊಳಗಾದ ಅನ್ನಪೂರ್ಣೇಶ್ವರಿನಗರ ಶ್ರೀಗಂಧದ ಕಾವಲು ನಿವಾಸಿ ಭಾಗ್ಯ ಅವರು ನೀಡಿದ ದೂರಿನ ಮೇರೆಗೆ ಸಿಎಆರ್ ಹೆಡ್ ಕಾನ್ಸ್ಟೇಬಲ್ ಪ್ರಶಾಂತ್ ಕುಮಾರ್, ಆತನ ಪತ್ನಿ ದೀಪಾ ಹಾಗೂ ಡಿ.ಪ್ರಶಾಂತ್ ಎಂಬುವವರ ವಿರುದ್ಧ ವಂಚನೆ, ನಂಬಿಕೆ ದ್ರೋಹ, ಜೀವ ಬೆದರಿಕೆ ಆರೋಪದಡಿ ಎಫ್ಐಆರ್ ದಾಖಲಿಸಿ ತನಿಖೆ ಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಎಸ್ಡಿಎಗೆ ₹15, ಎಫ್ಡಿಎಗೆ ₹25 ಲಕ್ಷ:
ತನ್ನ ಇಬ್ಬರು ಮಕ್ಕಳು ಸರ್ಕಾರಿ ಕೆಲಸಕ್ಕೆ ಪ್ರಯತ್ತಿಸುತ್ತಿದ್ದ ವೇಳೆ 2021ರಲ್ಲಿ ಪರಿಚಯನಾಗಿದ್ದ ತಮ್ಮದೇ ಊರಿನ ಚಾಮರಾಜಪೇಟೆಯ ಸಿಎಆರ್ ಹೆಡ್ ಕಾನ್ಸ್ಟೇಬಲ್ ಪ್ರಶಾಂತಕುಮಾರ್ ಅವರ ಬಳಿ ಮಕ್ಕಳು ಸರ್ಕಾರಿ ಕೆಲಸಕ್ಕೆ ಪ್ರಯತ್ನಿಸುವ ವಿಚಾರ ಪ್ರಸ್ತಾಪಿಸಿದ್ದೆ. ಈ ವೇಳೆ ಆತ ನಾನು ಸದ್ಯ ಎಡಿಜಿಪಿ ಉಮೇಶ್ ಕುಮಾರ್ ಅವರ ಕಾರು ಚಾಲಕನಾಗಿ ಕೆಲಸ ಮಾಡುತ್ತಿದ್ದು, ತನಗೆ ಹಲವು ಸರ್ಕಾರಿ ಅಧಿಕಾರಿಗಳು ಮತ್ತು ಕೆಪಿಎಸ್ಸಿ ಅಧಿಕಾರಿಗಳು ಪರಿಚಯವಿದ್ದಾರೆ. ಹೀಗಾಗಿ ಮೂರು ತಿಂಗಳೊಳಗೆ ನೇರ ನೇಮಕಾತಿ ಮುಖಾಂತರ ನಿಮ್ಮ ಮಗಳಿಗೆ ಎಸ್ಡಿಎ ಮತ್ತು ಮಗನಿಗೆ ಎಫ್ಡಿಎ ಕೆಲಸ ಕೊಡಿಸುವುದಾಗಿ ಭರವರಸೆ ನೀಡಿದ್ದ. ಈ ವೇಳೆ ಆತನ ಪತ್ನಿ ದೀಪಾ ಸಹ ಕೆಲಸ ಭರವಸೆ ನೀಡಿದ್ದಳು. ಎಸ್ಡಿಎ ಹುದ್ದೆಗೆ ₹15 ಲಕ್ಷ ಹಾಗೂ ಎಫ್ಡಿಎ ಹುದ್ದೆಗೆ ₹25 ಲಕ್ಷ ಕೊಡಬೇಕು ಎಂದು ಕೇಳಿದ್ದರು. ಮುಂಗಡವಾಗಿ ₹5.50 ಲಕ್ಷ ಪಡೆದುಕೊಂಡಿದ್ದರು ಎಂದು ದೂರಿನಲ್ಲಿ ತಿಳಿಸಲಾಗಿದೆ.




