ದಾವಣಗೆರೆ: ಗಂಡನ ಸಾವಿನ ಸುದ್ದಿ ಕೇಳಿ ಪತ್ನಿಯೂ ಹೃದಯಾಘಾತದಿಂದ ಸಾವನ್ನಪ್ಪಿದ ಮನಕಲಕುವ ಘಟನೆ ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲೂಕಿನ ದೇವರಹಳ್ಳಿ ಗ್ರಾಮದಲ್ಲಿ ನಡೆದಿದೆ. ಈ ಮೂಲಕ ವೃದ್ದ ದಂಪತಿ ಸಾವಿನಲ್ಲೂ ಒಂದಾಗಿದ್ದಾರೆ.
ದೇವರಹಳ್ಳಿ ಗ್ರಾಮದ ಕಸ್ತೂರಿ ರಂಗಪ್ಪ(65) ಪತ್ನಿ ಜಯಮ್ಮ(61) ಮೃತ ದುರ್ದೈವಿಗಳಾಗಿದ್ದಾರೆ. ಸೋಮವಾರ ಕಸ್ತೂರಿ ರಂಗಪ್ಪ ಪಡಿತರ ಅಕ್ಕಿ ತರಲು ಹೋಗಿದ್ದ ವೇಳೆ ಹೃದಯಾಘಾತದಿಂದ ಕುಸಿದು ಬಿದ್ದಿದ್ದರು. ತಕ್ಷಣ ಅವರನ್ನ ಚನ್ನಗಿರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಆದರೆ ಚಿಕಿತ್ಸೆ ಫಲಕಾರಿಯಾಗದೇ ರಂಗಪ್ಪ ಮೃತಪಟ್ಟಿದ್ದಾರೆ. ಸಂಬಂಧಿಕರು ಅವರ ಸಾವಿನ ಸುದ್ದಿಯನ್ನು ಪತ್ನಿ ಜಯಮ್ಮಗೆ ಕರೆ ಮಾಡಿ ತಿಳಿಸಿದ್ದಾರೆ. ಈ ವೇಳೆ ಪತಿಯ ಸಾವಿನ ಸುದ್ದಿ ತಿಳಿಯುತ್ತಿದ್ದಂತೆ ಜಯಮ್ಮ ಕೂಡ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ. ಇದರೊಂದಿಗೆ ಸಾವಿನಲ್ಲೂ ಒಂದಾದ ದಂಪತಿಯನ್ನು ಕುಟುಂಬಸ್ಥರು, ಗ್ರಾಮಸ್ಥರು ಸೇರಿ ದೇವರಹಳ್ಳಿ ಗ್ರಾಮದಲ್ಲಿ ಅಂತ್ಯಕ್ರಿಯೆ ಮಾಡಿದ್ದಾರೆ.