ಕಾರವಾರ: ಲಾರಿ ಚಾಲಕನ ಮೇಲೆ ಅಬಕಾರಿ ಅಧಿಕಾರಿಗಳು ಹಲ್ಲೆ ನಡೆಸಿದ ಘಟನೆ ವಿರೋಧಿಸಿ ಕಾರವಾರದ ಮಾಜಾಳಿಯ ಗೋವಾ ಗಡಿಯಲ್ಲಿ ಸೋಮವಾರ ಬೃಹತ್ ಪ್ರತಿಭಟನೆ ನಡೆಯಿತು.
ಕರ್ನಾಟಕ ರಾಜ್ಯ ಲಾರಿ ಮಾಲಕರು ಹಾಗೂ ಚಾಲಕರ ಸಂಘದ ವತಿಯಿಂದ ನಡೆದ ಪ್ರತಿಭಟನೆಯಲ್ಲಿ ನೂರಾರು ಸಂಖ್ಯೆಯಲ್ಲಿ ಲಾರಿ ಚಾಲಕರು ಹಾಗೂ ಸಾರ್ವಜನಿಕರು ಭಾಗವಹಿಸಿ ಅಬಕಾರಿ ಅಧಿಕಾರಿಗಳ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಪ್ರತಿಭಟನೆ ನಡೆದ ಬೆನ್ನಲ್ಲೇ ಹಲ್ಲೆ ನಡೆಸಿದ್ದ ಅಧಿಕಾರಿಗಳನ್ನು ಅಬಕಾರಿ ಆಯುಕ್ತರು ಅಮಾನತುಗೊಳಿಸಿ ಆದೇಶಿಸಿದ್ದಾರೆ.
ಇದೇ ಅಕ್ಟೋಬರ್ 15 ರಂದು ರಾತ್ರಿ ಸುಮಾರು 8 ಗಂಟೆ ವೇಳೆಗೆ ಲಾರಿ ಚಾಲಕ ಕುಮಾರ ಎಂಬುವವರು ಗೋವಾದಿಂದ ಬೆಂಗಳೂರಿಗೆ ವಾಟರ್ ಫಿಲ್ಟರ್ಗಳನ್ನು ಸಾಗಿಸುತ್ತಿದ್ದರು. ಈ ವೇಳೆ ಅಕ್ರಮ ಮದ್ಯ ಸಾಗಾಟದ ತಪಾಸಣೆಗೆ ಮುಂದಾದ ಅಬಕಾರಿ ಅಧಿಕಾರಿಗಳು ಲಾರಿ ಚಾಲಕನ ಮೇಲೆ ಹಲ್ಲೆ ನಡೆಸಿದ್ದು, ಆತನನ್ನು ಎಳೆದೊಯ್ದು ಮಾಜಾಳಿ ತನಿಖಾ ಠಾಣೆಯಲ್ಲಿ ಹಲ್ಲೆ ನಡೆಸಿ ಬಿಡುಗಡೆ ಮಾಡಿದ್ದರು. ತನಗಾದ ಅನ್ಯಾಯವನ್ನು ಚಾಲಕ ಕುಮಾರ ವೀಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದು, ಅಬಕಾರಿ ಅಧಿಕಾರಿಗಳ ಕಾರ್ಯವೈಖರಿಗೆ ಸಾರ್ವಜನಿಕ ವಲಯದಲ್ಲಿ ಭಾರೀ ವಿರೋಧ ವ್ಯಕ್ತವಾಗಿತ್ತು.
ಈ ಹಿನ್ನಲೆ ಕಾರವಾರದ ಜನಶಕ್ತಿ ವೇದಿಕೆ ಅಧ್ಯಕ್ಷ ಮಾಧವ ನಾಯ್ಕ ನೇತೃತ್ವದಲ್ಲಿ ಇಂದು ಲಾರಿ ಮಾಲೀಕರು ಹಾಗೂ ಚಾಲಕರ ರಾಜ್ಯ ಘಟಕದಿಂದ ಕರ್ನಾಟಕ ಗೋವಾ ಗಡಿಯಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ರಸ್ತೆ ತಡೆ ಮಾಡಲಾಯಿತು. ಅಲ್ಲದೇ ಲಾರಿ ಚಾಲಕರ ಮೇಲೆ ಅಬಕಾರಿ ಅಧಿಕಾರಿಗಳ ದೌರ್ಜನ್ಯವನ್ನು ಯಾವುದೇ ಕಾರಣಕ್ಕೂ ಸಹಿಸಲ್ಲ, ದುರ್ವರ್ತನೆ ತೋರಿದ ಅಧಿಕಾರಿಗಳನ್ನು ಅಮಾನತುಗೊಳಿಸುವಂತೆ ಪ್ರತಿಭಟನಾಕಾರರು ಆಗ್ರಹಿಸಿದರು.
ಇನ್ನು ಅಬಕಾರಿ ಅಧಿಕಾರಿಗಳ ನಡೆ ಖಂಡಿಸಿ ಲಾರಿ ಮಾಲೀಕರು ಹಾಗೂ ಚಾಲಕರ ಸಂಘ ಪ್ರತಿಭಟನೆ ಕರೆಕೊಟ್ಟ ಬೆನ್ನಲ್ಲೇ ಅಬಕಾರಿ ನಿರೀಕ್ಷಕ ಸದಾಶಿವ ಕೊರ್ತಿ ಹಾಗೂ ಅಬಕಾರಿ ಪೇದೆ ಹೇಮಚಂದ್ರನನ್ನು ವರ್ಗಾವಣೆ ಮಾಡಲಾಗಿತ್ತು. ಅಲ್ಲದೇ ಪ್ರಕರಣದ ಕುರಿತು ತನಿಖೆ ನಡೆಸಿ ವರದಿ ನೀಡುವಂತೆ ಇಲಾಖೆಯಿಂದ ಸೂಚಿಸಲಾಗಿತ್ತು.
ಈ ಹಿನ್ನಲೆ ಘಟನೆ ದಿನದ ಸಿಸಿಕ್ಯಾಮೆರಾ ದೃಶ್ಯಾವಳಿಗಳನ್ನು ಪರಿಶೀಲನೆ ನಡೆಸಿದ್ದ ಅಧಿಕಾರಿಗಳು ಮೇಲ್ನೋಟಕ್ಕೆ ಅಬಕಾರಿ ಸಿಬ್ಬಂದಿ ದೌರ್ಜನ್ಯ ತೋರಿಸಿರುವುದರ ಕುರಿತು ವರದಿ ನೀಡಿದ್ದರು. ಈ ಬೆನ್ನಲ್ಲೇ ಅಧಿಕಾರಿಗಳ ಅಮಾನತಿಗೆ ಆಗ್ರಹ ಕೇಳಿಬಂದ ಹಿನ್ನಲೆ ಅಬಕಾರಿ ಆಯುಕ್ತರು, ಲಾರಿ ಚಾಲಕನ ಮೇಲೆ ಹಲ್ಲೆ ನಡೆಸಿ ದುರ್ವತನೆ ತೋರಿದ ಅಬಕಾರಿ ಅಧಿಕಾರಿ ಹಾಗೂ ಸಿಬ್ಬಂದಿಯನ್ನು ಅಮಾನತುಗೊಳಿಸಿ ಆದೇಶಿಸಿದೆ.