ಬೆಂಗಳೂರು: ಕರ್ನಾಟಕದ ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರದ ಮಾಜಿ ಸಚಿವ ಎಸ್.ಎಂ.ಕೃಷ್ಣ ವಿಧಿವಶರಾಗಿದ್ದಾರೆ. ಅವರಿಗೆ 92 ವರ್ಷ ವಯಸ್ಸಾಗಿತ್ತು. ಬೆಂಗಳೂರಿನ ಸದಾಶಿವನಗರದ ನಿವಾಸದಲ್ಲಿ ಅವರು ನಿಧನರಾಗಿದ್ದಾರೆ.
ಕರ್ನಾಟಕದ ಹಿರಿಯ ರಾಜಕಾರಣಿಗಳಲ್ಲೊಬ್ಬರಾಗಿದ್ದ ಎಸ್.ಎಂ.ಕೃಷ್ಣ 1999 ರಿಂದ 2004 ರವರೆಗೆ ಕರ್ನಾಟಕ ರಾಜ್ಯದ ಮುಖ್ಯಮಂತ್ರಿಗಳಾಗಿದ್ದರು. ಮಹಾರಾಷ್ಟ್ರ ರಾಜ್ಯದ ಮಾಜಿ ರಾಜ್ಯಪಾಲರಾದ ಇವರು, ಕೇಂದ್ರ ವಿದೇಶಾಂಗ ಸಚಿವರಾಗಿಯೂ ಸಹ ಕಾರ್ಯ ನಿರ್ವಹಿಸಿದ್ದಾರೆ.
ವಿದ್ಯಾಭ್ಯಾಸದ ದೃಷ್ಟಿಯಿಂದ, ಕರ್ನಾಟಕದ ಅತ್ಯಂತ ಹೆಚ್ಚು ಸುಶಿಕ್ಷಿತ ಮುಖ್ಯಮಂತ್ರಿಗಳಲ್ಲಿ ಕೃಷ್ಣ ಒಬ್ಬರಾಗಿದ್ದಾರೆ. ಬಹುಕಾಲ ಕಾಂಗ್ರೆಸ್ ಪಕ್ಷದ ಸದಸ್ಯರಾಗಿದ್ದ ಎಸ್ಎಂಕೆ ಬದಲಾದ ರಾಜಕೀಯ ಸನ್ನಿವೇಶಗಳ ಕಾರಣ ಮಾರ್ಚ್ 2017 ರಂದು ಭಾರತೀಯ ಜನತಾ ಪಕ್ಷದ ಸದಸ್ಯತ್ವವನ್ನು ಪದೆದರು.
ಅವರು 1999 ರಿಂದ 2004 ರವರೆಗೆ ಕರ್ನಾಟಕದ 16 ನೇ ಮುಖ್ಯಮಂತ್ರಿಯಾಗಿದ್ದರು. ಮತ್ತು 2004 ರಿಂದ 2008 ರವರೆಗೆ ಮಹಾರಾಷ್ಟ್ರದ 19 ನೇ ರಾಜ್ಯಪಾಲರಾಗಿದ್ದರು. ಹಾಗೂ ಅವರು ಡಿಸೆಂಬರ್ 1989 ರಿಂದ ಜನವರಿ 1993 ರವರೆಗೆ ಕರ್ನಾಟಕ ವಿಧಾನಸಭೆಯ ಸ್ಪೀಕರ್ ಆಗಿಯೂ ಸೇವೆ ಸಲ್ಲಿಸಿದ್ದರು.
1971 ರಿಂದ 2014 ರವರೆಗೆ ವಿವಿಧ ಸಮಯಗಳಲ್ಲಿ ಲೋಕಸಭೆ ಮತ್ತು ರಾಜ್ಯಸಭೆಯ ಸದಸ್ಯರಾಗಿದ್ದರು. ಇವರಿಗೆ 2023ರ ಸಾಲಿನ ಪದ್ಮವಿಭೂಷಣ ಪ್ರಶಸ್ತಿ ನೀಡಲಾಗಿದೆ.
ಎಸ್.ಎಂ.ಕೃಷ್ಣ ಸಾವಿಗೆ ಕುಟುಂಬಸ್ಥರು, ಹಿರಿಯ ರಾಜಕಾರಣಿಗಳು, ಬಂಧು-ಮಿತ್ರರು ಕಂಬನಿ ಮಿಡಿದಿದ್ದಾರೆ.