ಚನ್ನಪಟ್ಟಣ: ಚನ್ನಪಟ್ಟಣ ಮತ್ತು ರಾಮನಗರ ಅವಳಿ ನಗರ ಮಾಡುವುದು ನನ್ನ ಕನಸು. ಇಷ್ಟೇ ಅಲ್ಲದೆ ಉಭಯ ನಗರಗಳ ನಡುವೆ ಸ್ಥಳೀಯರಿಗೆ ಉದ್ಯೋಗ ಕಲ್ಪಿಸುವ ನಿಟ್ಟಿನಲ್ಲಿ ಬೃಹತ್ ಕೈಗಾರಿಕೆ ಒಂದನ್ನು ಸ್ಥಾಪನೆ ಮಾಡುವ ಬಗ್ಗೆ ಪರಿಶೀಲನೆ ನಡೆಸಲಾಗುತ್ತಿದೆ ಎಂದು ಕೇಂದ್ರ ಸಚಿವ ಕುಮಾರಸ್ವಾಮಿ ಭರವಸೆ ನೀಡಿದ್ದಾರೆ.
ಚನ್ನಪಟ್ಟಣ ಕ್ಷೇತ್ರ ವ್ಯಾಪ್ತಿಯ ಕೂಡ್ಲೂರು ಗ್ರಾಮದಲ್ಲಿ ಸಾರ್ವಜನಿಕರನ್ನು ಉದ್ದೇಶಿಸಿ ಭಾಷಣ ಮಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಅವರು ನನ್ನ ಮೇಲೆ ನಂಬಿಕೆ ಇಟ್ಟು ಭಾರೀ ಕೈಗಾರಿಕೆ ಹಾಗೂ ಉಕ್ಕು ಖಾತೆಗಳನ್ನು ನೀಡಿದ್ದಾರೆ. ಎರಡೂ ಮಹತ್ವದ ಖಾತೆಗಳಾಗಿದ್ದು, ದೇವರ ಅನುಗ್ರಹ, ಜನರ ಆಶೀರ್ವಾದದಿಂದ ಸಿಕ್ಕಿರುವ ಈ ಅವಕಾಶದಿಂದ ರಾಮನಗರ ಜಿಲ್ಲೆಯ ಜನರಿಗೆ ಏನಾದರೂ ಒಳ್ಳೆಯ ಕೆಲಸ ಮಾಡುತ್ತೇನೆ ಎಂದು ಹೇಳಿದ್ದಾರೆ.
ಕಾಂಗ್ರೆಸ್ ನಾಯಕರು ನನ್ನನ್ನು ನಿಂದನೆ ಮಾಡಿಕೊಂಡು ಪ್ರಚಾರ ಮಾಡುತ್ತಿದ್ದಾರೆ. ನಾನು ಅಭಿವೃದ್ಧಿ ವಿಚಾರ ಇಟ್ಟುಕೊಂಡು ಪ್ರಚಾರ ಮಾಡುತ್ತಿದ್ದೇನೆ. ಅವರಿಗೂ ನನಗೂ ಇರುವ ವ್ಯತ್ಯಾಸ ಇಷ್ಟೇ ಎಂದು ಕಾಂಗ್ರೆಸ್ ನಾಯಕರ ವಿರುದ್ಧ ಹರಿಹಾಯ್ದರು.
ನಾವು ಟಿಕೆಟ್ ಕೊಡುತ್ತೇವೆ ಎಂದೆವು. ಬಿಜೆಪಿ ಕೂಡ ಟಿಕೆಟ್ ಕೊಡಲು ಮುಂದಾಗಿತ್ತು. ಬಿಜೆಪಿ ವರಿಷ್ಠರ ಮಾತಿಗೆ ತಲೆಬಾಗಿ ನಾವು ಚನ್ನಪಟ್ಟಣ ಕ್ಷೇತ್ರವನ್ನು ಬಿಟ್ಟುಕೊಡಲು ನಿರ್ಧಾರ ಮಾಡಿದ್ದೆವು. ಆದರೆ, ಎಲ್ಲರ ಮಾತನ್ನು ಧಿಕ್ಕರಿಸಿ, ಕಾಲಿನಲ್ಲಿ ಒದ್ದು ಅವರು ಕಾಂಗ್ರೆಸ್ ಸೇರಿಕೊಂಡರು. ಈಗ ನೋಡಿದರೆ ಹಾದಿಬೀದಿಯಲ್ಲಿ ಸುಳ್ಳು ಪ್ರಚಾರ ಮಾಡಿಕೊಂಡು ಓಡಾಡುತ್ತಿದ್ದಾರೆ ಎಂದು ಕಾಂಗ್ರೆಸ್ ಅಭ್ಯರ್ಥಿ ಯೋಗೇಶ್ವರ್ ಅವರನ್ನು ಪರೋಕ್ಷವಾಗಿ ಟೀಕಿಸಿದರು.
ನನ್ನ ಬಗ್ಗೆ, ನನ್ನ ತಂದೆಯ ಬಗ್ಗೆ ಬಹಳ ಕೀಳುಮಟ್ಟದ ಭಾಷೆ ಬಳಕೆ ಮಾಡಿಕೊಂಡು ಟೀಕೆ ಮಾಡುತ್ತಿದ್ದಾರೆ. ಅವರ ಪದ ಬಳಕೆಯ ಬಗ್ಗೆ ನಾನು ತಲೆ ಕೆಡಿಸಿಕೊಳ್ಳುವುದಿಲ್ಲ. ಚನ್ನಪಟ್ಟಣ ಜನರೇ ತೀರ್ಪು ಕೊಡುತ್ತಾರೆ ಎಂದು ಹೇಳಿದ್ದಾರೆ.